ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು.

ಪಟ್ಟಣದ ಹರವೆ ಮಲ್ಲರಾಜಪಟ್ಟಣ ಬಳಿಯ ತಾಲೂಕು ಕ್ರೀಡಾಂಗಣದಲ್ಲಿ ಪಟ್ಟಣದ ಎಸ್ ಕೆ ಎಸ್ ಟಿ  ಬಾಲಕಿಯರ ಪ್ರೌಢಶಾಲೆ  ಸಹಯೋಗದಲ್ಲಿ  ಆಯೋಜಿಸಲಾಗಿದ್ದ ಕಸಬಾ ಹೋಬಳಿ ವ್ಯಾಪ್ತಿಯ ಪ್ರೌಢಶಾಲಾ  ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು, ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಗೆದ್ದಾಗ ಹಿಗ್ಗದೆ ಸೋತಾಗ ಕುಗ್ಗದೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು, ಇಂದಿನ ಸೋಲು ನಾಳಿನ ಗೆಲುವಿಗೆ ಸಹಕಾರಿಯಾಗುವಂತೆ ಅಭ್ಯಾಸ ಮಾಡುವಂತೆ ಕರೆ ನೀಡಿದರು. 

   ತಾ.ಪಂ ಅಧ್ಯಕ್ಷೆ ಕೆ.ಆರ್ ನಿರೂಪರಾಜೇಶ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಭಾರತ ದೇಶದ ಕ್ರೀಡಾಪಟುಗಳು ವಿಶ್ವ ಮಟ್ಟದ ಸ್ಪರ್ಧೆಗಳಲ್ಲಿ ಜಯಗಳಿಸಿ ಸಾಧನೆ ಮಾಡುತ್ತಿರುವುದು ಶ್ಲಾಘನೀಯ, ಮಹಿಳೆಯರು ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

    ತಹಶೀಲ್ದಾರ್ ಶ್ವೇತಾ ಎನ್. ರವೀಂದ್ರ ಮಾತನಾಡಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಆಟೋಟ ಸ್ಪರ್ಧೆಗಳಂತಹ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರ ಮೂಲಕ ಮಾನಸಿಕವಾಗಿ ಸದೃಢರಾಗಿ ಜಯದ ಗುರಿ ತಲುಪಬೇಕು ಎಂದರು.  

   ಪಥಸಂಚಲನ ಕಾರ್ಯಕ್ರಮದಲ್ಲಿ ಪಟ್ಟಣದ ಎಸ್ ಕೆ ಎಸ್ ಟಿ ಬಾಲಕಿಯರ ಪ್ರೌಢಶಾಲೆ ಪ್ರಥಮ ಬಹುಮಾನ, ಮೊರಾರ್ಜಿ ಪ್ರೌಢಶಾಲೆ ದ್ವಿತೀಯ ಬಹುಮಾನ, ಡಿಪಿಬಿಎಸ್ ಬಾಲಕರ ಪ್ರೌಢಶಾಲೆ ತೃತೀಯ ಸ್ಥಾನ ಪಡೆದವು, ಕಸಬಾ ಹೋಬಳಿ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು, ಬಿಇಒ ಚಿಕ್ಕಸ್ವಾಮಿ ಕ್ರೀಡಾ ಜ್ಯೋತಿ ಸ್ವೀಕರಿಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. 

   ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯ ರಾಜೇಂದ್ರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಯೋಗ, ಸರ್ಕಲ್ ಇನ್ಸ್ ಪೆಕ್ಟರ್ ಬಿ.ಆರ್ ಪ್ರದೀಪ್ ಮಾತನಾಡಿದರು.

   ಈ ಸಂದರ್ಭ ಪುರಸಭಾ ಸದಸ್ಯರಾದ ಪ್ರಕಾಶ್ ಸಿಂಗ್, ನಿರಂಜನ್, ಪಿ.ಸಿ ಕೃಷ್ಣ, ದೈಹಿಕ ಪರಿವೀಕ್ಷಕ ರಘುಪತಿ, ವಿವಿಧ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರುಗಳು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top