
ಪಿರಿಯಾಪಟ್ಟಣ: ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶದ ಅಭಿವೃದ್ಧಿಗೆ ಪ್ರಾಮಾಣಿಕ ಶ್ರಮಿಸುತ್ತಿರುವುದಾಗಿ ಶಾಸಕ ಕೆ.ಮಹದೇವ್ ತಿಳಿಸಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪುರಸಭೆಯ ಉದ್ಯಮ ನಿಧಿ ಯೋಜನೆಯಡಿ 26.97 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಸಿಗ್ನಲ್ ಲೈಟ್ ಹಾಗು ಸೋಲಾರ್ ಬ್ಲಿಂಕರ್ ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು, ನಾನು ಪಟ್ಟಣದಲ್ಲೇ ವಾಸಿಸುತ್ತಿರುವುದರಿಂದ ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವಿದೆ ಪ್ರತಿನಿತ್ಯ ನೂರಾರು ಮಂದಿ ಸಮಸ್ಯೆಗಳ ಬಗ್ಗೆ ಮನವಿ ನೀಡುತ್ತಾರೆ ಅವೆಲ್ಲ ಪಾರದರ್ಶಕವಾಗಿ ಬಗೆಹರಿಸಿದ್ದೇನೆ, ಈ ಹಿಂದೆ ಪಟ್ಟಣ ಪಂಚಾಯಿತಿ ಅಧ್ಯಕ್ಷನಾದಾಗಲು ಪಟ್ಟಣದ ಜನತೆಗೆ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಿದ್ದೆ, ಪಟ್ಟಣದ ಜನತೆ ಅಭಿವೃದ್ಧಿ ಹಿತದೃಷ್ಟಿಯಿಂದ ಪುರಸಭೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬಹುಮತದ ಅಧಿಕಾರ ಕೊಟ್ಟಿದ್ದಾರೆ, ಅಧ್ಯಕ್ಷ ಸ್ಥಾನದ ಮೀಸಲಾತಿಯಿಂದಾಗಿ ಎರಡು ವರ್ಷಗಳ ಕಾಲ ಸ್ಥಳೀಯ ಆಡಳಿತದಿಂದ ಅಭಿವೃದ್ಧಿ ಕುಂಠಿತವಾಗಿದ್ದರೂ ಶಾಸಕನಾಗಿ ಪಟ್ಟಣದ ಜನತೆಗೆ ಕುಡಿಯುವ ನೀರು, ವಿದ್ಯುತ್ ಹಾಗೂ ಮೂಲಭೂತ ಸೌಕರ್ಯ ಸೇರಿದಂತೆ ಸ್ವಚ್ಚತೆಗೆ ಹೆಚ್ಚು ಒತ್ತು ನೀಡಿದ್ದೇನೆ, ಶಾಸಕನಾಗಿ ಆಯ್ಕೆಯಾದ ನಂತರ ಪ್ರವಾಹ ಹಾಗೂ ಕೊರೊನಾ ಸಂಕಷ್ಟ ಪರಿಸ್ಥಿತಿಗಳಲ್ಲಿಯೂ ಸರ್ಕಾರಕ್ಕೆ ಮನವಿ ಮಾಡಿ ಅನುದಾನ ತಂದು ಅಭಿವೃದ್ಧಿ ಗೆ ಒತ್ತು ನೀಡಿದ್ದೇನೆ, ಮುಂದಿನ ದಿನಗಳಲ್ಲಿಯೂ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ, ಪಟ್ಟಣದಲ್ಲಿ ಸಂಚಾರ ಒತ್ತಡ ದಿನೇ ದಿನೇ ಹೆಚ್ಚುತ್ತಿರುವುದನ್ನು ಮನಗಂಡು ಪುರಸಭೆ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಸಿಗ್ನಲ್ ಲೈಟ್ ಅಳವಡಿಸಿ ಪ್ರಮುಖ ರಸ್ತೆಗಳಲ್ಲಿ ಸೋಲಾರ್ ಬ್ಲಿಂಕಿಂಗ್ ಲೈಟ್ ಅಳವಡಿಸಲಾಗಿದೆ, ಪ್ರತಿಯೊಬ್ಬ ವಾಹನ ಸವಾರರು ಸಂಚಾರಿ ನಿಯಮಗಳನ್ನು ಕಡ್ಡಾಯ ಪಾಲಿಸಿ ಆರಕ್ಷಕ ಇಲಾಖೆಗೆ ಸಹಕರಿಸುವಂತೆ ಕೋರಿದರು.
ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ ಪಟ್ಟಣದ ಬಹು ದಿನಗಳ ಬೇಡಿಕೆಯಾದ ಸಿಗ್ನಲ್ ಲೈಟ್ ಅಳವಡಿಕೆ ಕಾರ್ಯವನ್ನು ಪುರಸಭೆ ವತಿಯಿಂದ ಮಾಡಿದ್ದು ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿ ನಗರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಶಾಸಕ ಕೆ.ಮಹದೇವ್ ಹಾಗೂ ಸದಸ್ಯರ ಪಕ್ಷಾತೀತ ಸಹಕಾರದಿಂದ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ ಎಂದರು.
ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಮಾಜಿ ಸದಸ್ಯ ಟಿ.ಈರಯ್ಯ, ಸದಸ್ಯ ಪಿ.ಸಿ ಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಎನ್ ವಿನೋದ್, ಬಿಇಒ ವೈ.ಕೆ ತಿಮ್ಮೆಗೌಡ ಮಾತನಾಡಿದರು.
ಈ ಸಂದರ್ಭ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಇನ್ಸ್ ಪೆಕ್ಟರ್ ಗಳಾದ ಜಗದೀಶ್, ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಸದಾಶಿವ ತಿಪ್ಪರೆಡ್ಡಿ ಮತ್ತು ಸಿಬ್ಬಂದಿ, ಪುರಸಭಾ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಮುಖಂಡರು ಹಾಜರಿದ್ದರು