
ಪಿರಿಯಾಪಟ್ಟಣ : ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನಲ್ಲಿ ಸಾವಿರಾರು ಮಂದಿಗೆ ಕೂಲಿ ಕೆಲಸ ನೀಡಲು ಸಾಧ್ಯವಾಗಿದ್ದು, ಕೂಲಿ ಕೆಲಸ ಮಾಡಲು ಮುಂದೆ ಬರುವ ಪ್ರತಿಯೊಬ್ಬರಿಗೂ ತಕ್ಷಣ ಜಾಬ್ ಕಾರ್ಡ್ ನೀಡಲಾಗುವುದು ಎಂದು ಶಾಸಕ ಕೆ ಮಹದೇವ್ ತಿಳಿಸಿದರು.
ಅವರು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ಕೋಗಿಲವಾಡಿ ಗ್ರಾಮದ ಸತ್ಯ ಕೆರೆ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಅವರು ಕೊರೋನಾ ಸಂಕಷ್ಟದಿಂದ ತತ್ತರಿಸಿದ ತಾಲೂಕಿನ ಜನತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ನರೇಗಾ ಕಾಮಗಾರಿಗಳಲ್ಲಿ ಕೂಲಿ ಕೆಲಸದಲ್ಲಿ ತೊಡಗಿದ್ದು, ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸವನ್ನು ನಿಗದಿಪಡಿಸಲಾಗಿದೆ. ಅಂತರ್ಜಲ ಚೇತನ ಯೋಜನೆಯಡಿ ಕಾಮಗಾರಿಗಳನ್ನು ಗುರುತಿಸಲಾಗಿದ್ದು, ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ಕೆಲಸದ ಸ್ಥಳದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮಾತ್ರವಲ್ಲದೆ ಕೂಲಿ ಕೆಲಸದವರಿಗೆ ಕುಡಿಯುವ ನೀರು ಇತ್ಯಾದಿ ಮೂಲಸೌಲಭ್ಯಗಳನ್ನು ಸಹ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ ಕಾಮಗಾರಿಗಳ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಮತ್ತು ಕೆರೆ ಏರಿಗಳ ವಿಸ್ತರಣೆ ನಡೆಯುತ್ತಿರುವ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ನ ಗ್ರಾಮಗಳ ಕೆರೆಗಳ ಮೇಲ್ದರ್ಜೆಗೇರಿಸಿ ತಾಲೂಕಿನಲ್ಲಿ ಅಂತರ್ಜಲ ಮಟ್ಟವನ್ನು ಕಾಪಾಡುವ ದೃಷ್ಟಿಯಿಂದ ತಾಲೂಕಿನ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಅಲೆಯುವುದನ್ನು ತಪ್ಪಿಸಲು, ನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿ ಉದ್ಯೋಗ ಕಾರ್ಡ್ಗಳನ್ನು ಮಾಡಿಸಿ, ಕೆಲಸ ನೀಡಲಾಗುತ್ತಿದ್ದು ತಾಲೂಕಿನಲ್ಲಿರುವ ಕೂಲಿಕಾರ್ಮಿಕರು ಮುಂದೆ ಬಂದು ತಮಗೆ ಬೇಕಾದ ಗ್ರಾಮಪಂಚಾಯಿತಿಗಳಲ್ಲಿ ಅಭಿವೃದ್ಧಿ ಅಧಿಕಾರಿಗಳನ್ನು ಭೇಟಿ ಮಾಡಿ ಕೆಲಸ ಮಾಡಲು ನೊಂದಾಯಿಸಿಕೊಂಡು ಕೆಲಸದಲ್ಲಿ ತೊಡಗಿಕೊಳ್ಳಲು ತಿಳಿಸಿದರು . ಗ್ರಾಮೀಣ ಭಾಗದ ನಿರುದ್ಯೋಗಿ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕಲ್ಪಿಸಬೇಕು. ಇದರಿಂದ ಈ ಸಂಕಷ್ಟಮಯ ಸಂದರ್ಭದಲ್ಲಿ ಆರ್ಥಿಕ ಪುನಶ್ಚೇತನ ಹೊಂದಲು ಸಾಧ್ಯವಾಗಲಿದೆ. ನಗರ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಲಾಕ್ಡೌನ್ ಸಂದರ್ಭದಲ್ಲಿ ವಲಸೆ ಬಂದಿರುವವರು, ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಬಯಸಿ ಅರ್ಜಿ ಸಲ್ಲಿಸಿದರೆ ತಕ್ಷಣ ಜಾಬ್ ಕಾರ್ಡ್ ನೀಡಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು .

ಈ ಸಂದರ್ಭದಲ್ಲಿ ತಹಸಿಲ್ದಾರ್ ಚಂದ್ರಮೌಳಿ ತಾಲೂಕು ಆರೋಗ್ಯಾಧಿಕಾರಿ ಶರತ್ ಬಾಬು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಿ ಉಪಾಧ್ಯಕ್ಷ ರವಿಚಂದ್ರ ಗುತ್ತಿಗೆದಾರ ಸೈಯಬಾ ಸದಸ್ಯ ಲಕ್ಷ್ಮಣ ಯಜಮಾನ್ ವೀರಪ್ಪ ಗ್ರಾಮಸ್ಥರಾದ ಪಾಪೇಗೌಡ ಶಂಕ್ರಪ್ಪ ಮತ್ತಿತರರು ಹಾಜರಿದ್ದರು














